ಶಾಸಕ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗಲಿ: ಸಚಿವ ಶಿವರಾಮ್ ಹೆಬ್ಬಾರ್

ಕಾರವಾರ: ಸರ್ಕಾರಕ್ಕಾಗಿ ತ್ಯಾಗ ಮಾಡಿದವರಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪಾತ್ರ ದೊಡ್ಡದು. ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂಬುದು ನಮ್ಮ ಆಶಯ ಕೂಡ ಆಗಿದೆ ಎಂದು ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಯಾರಿಗೆಲ್ಲ ಸಚಿವ ಸ್ಥಾನ ಕೊಡಬೇಕು ಎಂಬುದು ಸಿಎಂ ಹಾಗೂ ವರಿಷ್ಠರ ನಿರ್ಧಾರಕ್ಕೆ ಬಿಟ್ಟ ವಿಚಾರ. ಆದರೆ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗಬೇಕು ಎಂಬುದು ನಮ್ಮ ಆಶಯವೂ ಆಗಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಹೆಬ್ಬಾರ್, ಹಿಜಾಬ್ ವಿಚಾರ ನ್ಯಾಯಾಲಯದಲ್ಲಿ ಇರುವುದರಿಂದ ಈ ಬಗ್ಗೆ ಮಾತನಾಡುವುದು ಸರಿಯಲ್ಲ. ಹೈಕೋರ್ಟ್ ತ್ರಿಸದಸ್ಯ ಪೀಠ ರಚನೆ ಮಾಡಿ ವಿಸ್ತೃತ ಚರ್ಚೆ ನಡೆಸಿದೆ. ನ್ಯಾಯಾಲಯದ ತೀರ್ಪು ಬರಲಿ, ಕೋರ್ಟ್ ತೀರ್ಪಿಗೆ ತಲೆಬಾಗುವುದು ನಮ್ಮೆಲ್ಲರ ಕರ್ತವ್ಯ. ಹಾಗಾಗಿ ಈ ಬಗ್ಗೆ ಹೆಚ್ಚಿನ ಮಾತು ಬೇಡ ಎಂದರು.