ನಿಪ್ಪಾಣಿ-ಬೆಳಗಾವಿ ಭಾಗದ ಜನರಿಗೆ ಮಹಾರಾಷ್ಟ್ರದ ಆರೋಗ್ಯ ವಿಮೆ: ಸಿಎಂ ಬೊಮ್ಮಾಯಿ ತೀವ್ರ ಖಂಡನೆ

ಬೆಳಗಾವಿ: ಗಡಿ ವಿವಾದ ಮುಂದಿಟ್ಟುಕೊಂಡು ಪದೇ ಪದೆ ಕರ್ನಾಟಕದ ಜತೆಗೆ ಕ್ಯಾತೆ ತೆಗೆಯುತ್ತಾ ಬಂದಿರುವ ಮಹಾರಾಷ್ಟ್ರ ಸರ್ಕಾರ ಕರ್ನಾಟಕದ 865 ಹಳ್ಳಿ, ಪಟ್ಟಣಗಳಲ್ಲಿನ ಜನರಿಗೆ ಆರೋಗ್ಯ ವಿಮೆ ನೀಡಲು ಮುಂದಾಗಿದೆ.
ರಾಜ್ಯ ಗಡಿ ಭಾಗ ನಿಪ್ಪಾಣಿ ಹಾಗೂ ಬೆಳಗಾವಿ ಭಾಗದ ಜನರಿಗೆ ಜ್ಯೋತಿಬಾ ಆರೋಗ್ಯ ವಿಮೆ ಮಾಡುವುದಕ್ಕೆ 54 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತೀವ್ರವಾಗಿ ಖಂಡಿಸಿದ್ದಾರೆ.
ಬೆಂಗಳೂರಿನಲ್ಲಿ ತಮ್ಮ ನಿವಾಸದ ಮುಂಭಾಗ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಗಡಿ ಭಾಗದ ಜನರಿಗೆ ಆರೋಗ್ಯ ವಿಮೆ ಯೋಜನೆಯನ್ನು ಮಹಾರಾಷ್ಟ್ರದ ಸಂಪುಟ ನಿರ್ಣಯ ಘೋಷಿಸಿರುವುದು ಅಕ್ಷಮ್ಯ ಅಪರಾಧ ಎಂದು ಕಿಡಿಕಾರಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿದಾಗ ಸುಪ್ರೀಂಕೋರ್ಟ್ ಆದೇಶ ಬರುವವರೆಗೆ ಕಾಯಬೇಕು. ಯಾವುದೇ ಪ್ರಚೋದನೆ ಆಗಬಾರದೆಂದು ಒಪ್ಪಲಾಗಿತ್ತು.
ಈಗ ಅದರ ಉಲ್ಲಂಘನೆಯಾಗಿದೆ. ಕೂಡಲೇ ಈ ನಿರ್ಧಾರವನ್ನು ಹಿಂದೆಗೆದುಕೊಳ್ಳಬೇಕು. ಈ ವಿಚಾರವನ್ನು ಗೃಹ ಸಚಿವರ ಗಮನಕ್ಕೂ ತರಲಾಗುವುದು ಎಂದು ತಿಳಿಸಿದರು.
ಈ ರೀತಿಯ ಯೋಜನೆಗಳನ್ನು ನಾವು ಕೂಡಾ ಪ್ರಕಟಿಸಬಹುದು. ಹಲವಾರು ತಾಲೂಕುಗಳು, ಗ್ರಾಮ ಪಂಚಾಯಿತಿಗಳು ಮಹಾರಾಷ್ಟ್ರದಲ್ಲಿ ನಮಗೆ ನ್ಯಾಯ ಸಿಗುತ್ತಿಲ್ಲ, ಕರ್ನಾಟಕಕ್ಕೆ ಸೇರಬೇಕು ಎಂದು ಈಗಾಗಲೇ ನಿರ್ಣಯ ಮಾಡಿದೆ.
ಇಂತಹ ಪರಿಸ್ಥಿತಿಯಲ್ಲಿ ಇದ್ದಾಗ ಮಹಾರಾಷ್ಟ್ರದ ಸರ್ಕಾರ ಬಹಳ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದರು.