Belagavi News In Kannada | News Belgaum

ಇನ್ಮುಂದೆ ಇಂದಿರಾ ಕ್ಯಾಂಟೀನ್‌ನಲ್ಲಿ ಸಿಗಲಿದೆ ಈ ಎಲ್ಲಾ ಪೌಷ್ಠಿಕ ಆಹಾರ

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಿಗೆ ಮರುಜೀವ ನೀಡಲು ಸರ್ಕಾರ ಮುಂದಾಗಿದ್ದು, ಊಟದ ಮೆನುವಿನಲ್ಲಿ ರಾಗಿಮುದ್ದೆ ಮತ್ತು ಚಪಾತಿ ಸಾಗು ಪರಿಚಯಿಸಲು ಚಿಂತನೆ ನಡೆಸಿದೆ.

ಇಂದಿರಾ ಕ್ಯಾಟೀನ್‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2017 ರಲ್ಲಿ ಪ್ರಾರಂಭಿಸಿದರು. ಕ್ಯಾಂಟೀನ್‌ಗಳಿಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹೆಸರನ್ನು ಇಡಲಾಗಿದೆ.

ರಾಜ್ಯಾದ್ಯಂತ ಬಡವರಿಗೆ ಕಡಿಮೆ ದರದಲ್ಲಿ ಆಹಾರ ಒದಗಿಸುವ ಗುರಿಯೊಂದಿಗೆ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿದೆ. ಕ್ಯಾಂಟೀನ್‌ಗಳಲ್ಲಿ ಬೆಳಗಿನ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟವನ್ನು ಪ್ಲೇಟ್‌ಗೆ 5 ರಿಂದ 10 ರೂ.ಗೆ ನೀಡಲಾಗುತ್ತದೆ.

ಅಧಿಕಾರಿಗಳ ಮಾಹಿತಿಯ ಪ್ರಕಾರ, ಬೆಂಗಳೂರಿನಲ್ಲಿರುವ 175 ಇಂದಿರಾ ಕ್ಯಾಂಟೀನ್‌ಗಳಲ್ಲಿ 163 ಕಾರ್ಯನಿರ್ವಹಿಸುತ್ತಿವೆ. ಈ ಕ್ಯಾಂಟೀನ್‌ಗಳನ್ನು ಸ್ವಚ್ಛಗೊಳಿಸುವಂತೆ ಹಾಗೂ ಕಸ ವಿಲೇವಾರಿಗೆ ಪೌರಕಾರ್ಮಿಕರನ್ನು ನೇಮಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಸಾರ್ವಜನಿಕರಿಗೆ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರವನ್ನು ಒದಗಿಸುವಂತೆ ಮತ್ತು ಇಂದಿರಾ ಕ್ಯಾಂಟೀನ್‌ಗಳ ನಿರ್ವಹಣೆಗೆ ಪ್ರಸ್ತಾವನೆಯನ್ನು ಸಿದ್ಧಪಡಿಸುವಂತೆ ವಿಶೇಷ ಆಯುಕ್ತ (ಆರೋಗ್ಯ) ತ್ರಿಲೋಕ್ ಚಂದ್ರ ಕೆ ವಿ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಅಲ್ಲದೆ ಸಂಚಾರಿ ಇಂದಿರಾ ಕ್ಯಾಂಟೀನ್‌ಗಳನ್ನು ಪುನರಾರಂಭಿಸಿ ವರದಿ ಸಲ್ಲಿಸುವಂತೆ ವಲಯ ಆಯುಕ್ತರಿಗೆ ಸೂಚಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಎರಡನೇ ಅವಧಿಯ ಮೊದಲ ಪತ್ರಿಕಾಗೋಷ್ಠಿಯಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಇಂದಿರಾ ಕ್ಯಾಂಟೀನ್‌ಗಳನ್ನು ಪುನರುಜ್ಜೀವನಗೊಳಿಸುವ ಉದ್ದೇಶವನ್ನು ವ್ಯಕ್ತಪಡಿಸಿದ್ದಾರೆ. ಪೌಷ್ಟಿಕ ಆಹಾರದ ಆಯ್ಕೆಗಳನ್ನು ಅಳವಡಿಸಲು ಮತ್ತು ಬೇಡಿಕೆಯ ಆಧಾರದ ಮೇಲೆ ಭೋಜನವನ್ನು ಲಭ್ಯವಾಗುವಂತೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ./////