Belagavi News In Kannada | News Belgaum

ತಪ್ಪು ಮರುಕಳಿಸಿದರೆ ವರ್ಗಾವಣೆ ಖಚಿತವೆಂದ ಸಚಿವ ಸತೀಶ್‌ ಜಾರಕಿಹೊಳಿ

 

ಬೆಳಗಾವಿ: ಬಹಳಷ್ಟು ಜನರು ಮಹಾನಗರ ಪಾಲಿಕೆ ಸಿಬ್ಬಂದಿಯ ಕಾರ್ಯ ವೈಖರಿ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅನೇಕ ಅಧಿಕಾರಗಳ ವಿರುದ್ಧ ಆರೋಪಗಳು ಕೇಳಿ ಬಂದಿದ್ದು ಮುಂಬರುವ ದಿನಗಳಲ್ಲಿ ಸುಧಾರಿಸದೇ ಹೋದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಸ್ಮಾರ್ಟ್ ಸಿಟಿ, ಕುಡಿಯುವ ನೀರು ಸರಬರಾಜು, ಹೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಕಾಮಗಾರಿಗಳ ಪರಿಶೀಲನಾ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆಲವು ಸಲಹೆ ಸೂಚನೆ ನೀಡಿದ್ದು, ಅಧಿಕಾರಿಗಳು ಒಳ್ಳೆಯ ಕೆಲಸ ಮಾಡುತ್ತಾರೆ ಎಂಬ ಆಶಯವಿದೆ. ತಕ್ಷಣ ಎಲ್ಲರನ್ನೂ ಬದಲಾವಣೆ ಮಾಡಬೇಕು ಎಂಬ ಆಸೆಯೂ ಇಲ್ಲ, ಇಚ್ಚೆಯೂ ಇಲ್ಲ. ಮೂರು ತಿಂಗಳ ಬಳಿಕ ಬಂದಾಗ ಇದೇ ಸ್ಥಿತಿ ಇದ್ದರೆ ಅಂತಹ ಅಧಿಕಾರಿಗಳನ್ನು ತಪ್ಪದೇ ವರ್ಗಾವಣೆ ಮಾಡಿಸುತ್ತೇವೆ ಎಂದು ಎಚ್ಚರಿಸಿದರು.

ಬೆಳಗಾವಿ ಸ್ಮಾರ್ಟ್ ಸಿಟಿ, ಕುಡಿಯುವ ನೀರು ಪೂರೈಕೆ, ಪಿಡಬ್ಲ್ಯೂಡಿ, ಹೆಸ್ಕಾಂ ಸೇರಿದಂತೆ ಹಲವು ಇಲಾಖೆಗಳ ಬಗ್ಗೆ ಪ್ರತ್ಯೇಕ ಸಭೆ ಮಾಡುತ್ತೇವೆ. ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳು, ಸರ್ಕಾರದ ಎಲ್ಲಾ ಸೇವೆಗಳನ್ನು ಸರಿಯಾಗಿ ಓದಗಿಸುವುದೇ ಸರ್ಕಾರ ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು.