Belagavi News In Kannada | News Belgaum

ಕನ್ನಡ ಚಿತ್ರರಂಗದ ಹಿರಿಯ ನಟ ಸಿ.ವಿ. ಶಿವಶಂಕರ್​ ನಿಧನ

ಬೆಂಗಳೂರು: ಚಂದನವನದಲ್ಲಿ ಹಲವು ವರ್ಷಗಳ ಅನುಭವ ಹೊಂದಿದ್ದ ನಟ, ನಿರ್ದೇಶಕ ಸಿ.ವಿ. ಶಿವಶಂಕರ್​ ಅವರು ನಿಧನರಾಗಿದ್ದಾರೆ. ಇಂದು (ಜೂನ್​ 27) ಮಧ್ಯಾಹ್ನ 2 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತ ಆಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅವರು ಬದುಕು ಉಳಿಯಲಿಲ್ಲ ಎಂಬುದು ನೋವಿನ ಸಂಗತಿ. ಸಿ.ವಿ. ಶಿವಶಂಕರ್​ ಅವರಿಗೆ 90 ವರ್ಷ ವಯಸ್ಸಾಗಿತ್ತು. ‘ಯಾವುದೇ ಗಂಭೀರವಾದ ಆರೋಗ್ಯ ಸಮಸ್ಯೆ ಅವರಿಗೆ ಇರಲಿಲ್ಲ. ಮಧ್ಯಾಹ್ನ ಊಟ ಮುಗಿಸಿದರು. ಪೂಜೆ ಮಾಡಿದ ಬಳಿಕ ಹಾರ್ಟ್​ ಅಟ್ಯಾಕ್​ ಆಯಿತು’ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಸಿ.ವಿ. ಶಿವಶಂಕರ್​ ಅವರ ನಿಧನಕ್ಕೆ ಚಿತ್ರರಂಗದವರು ಸಂತಾಪ ಸೂಚಿಸುತ್ತಿದ್ದಾರೆ. ಅಂತ್ಯಕ್ರಿಯೆ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ.
ಆರಂಭದಲ್ಲಿ ಸಿ.ವಿ. ಶಿವಶಂಕರ್​ ಅವರು ರಂಗಭೂಮಿಯಲ್ಲಿ ತೊಡಗಿಕೊಂಡಿದ್ದರು. ಬಾಲನಟನಾಗಿಯೇ ರಂಗಭೂಮಿ ಪ್ರವೇಶಿಸಿದ್ದ ಅವರು ಅನೇಕ ನಾಟಕಗಳಲ್ಲಿ ಅಭಿನಯಿಸಿದ್ದರು. ನಂತರ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ‘ಸ್ಕೂಲ್ ಮಾಸ್ಟರ್​’, ‘ಕೃಷ್ಣ ಗಾರುಡಿ’, ‘ರತ್ಮಮಂಜರಿ’, ‘ರತ್ನಗಿರಿ ರಹಸ್ಯ’ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಹಲವು ನಿರ್ದೇಶಕರ ಜೊತೆ ಸಹಾಯಕರಾಗಿ ಅನುಭವ ಪಡೆದ ಬಳಿಕ ‘ಮನೆ ಕಟ್ಟಿ ನೋಡು’ ಸಿನಿಮಾವನ್ನು ಸ್ವತಂತ್ರವಾಗಿ ನಿರ್ದೇಶಿಸಿದ್ದರು.//////