ಸಲ್ಮಾನ್ ಖಾನ್ ಕೊಲ್ಲುವುದೇ ನನ್ನ ಗುರಿ: ಗ್ಯಾಂಗ್ ಸ್ಟರ್ ಗೋಲ್ಡಿ ಬಹಿರಂಗ ಹೇಳಿಕೆ

ಮುಂಬೈ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಕೊಂದಿರುವುದು ತಾನೇ ಎಂದು ಹೇಳಿಕೊಂಡಿರುವ ಗ್ಯಾಂಗ್ ಸ್ಟರ್ ಗೋಲ್ಡಿ ಬ್ರಾರ್ ನನ್ನ ಮುಂದಿನ ಟಾರ್ಗೆಟ್ ಸಲ್ಮಾನ್ ಖಾನ್ ಎಂದು ಹೇಳುವ ಮೂಲಕ ಆತಂಕ ಸೃಷ್ಟಿ ಮಾಡಿದ್ದಾನೆ. ರಾಷ್ಟ್ರೀಯ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಗೋಲ್ಡಿ ಬ್ರಾರ್, ‘ನನ್ನ ಮುಂದಿನ ಗುರಿ ಇರುವುದು ಸಲ್ಮಾನ್ ಖಾನ್ ನನ್ನು ಕೊಲ್ಲುವುದು. ಕೊಂದೇ ಕೊಲ್ಲುತ್ತೇನೆ. ನನ್ನಿಂದ ಅವನು ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ’ ಎಂದು ಸಂದರ್ಶನದಲ್ಲಿ ಹೇಳಿದ್ದಾನೆ.
ರಾಷ್ಟ್ರೀಯ ವಾಹಿನಿಯಲ್ಲಿ ಹಲವು ರಾಜ್ಯಗಳ ಪೊಲೀಸರಿಗೆ ಬೇಕಾಗಿರುವ, ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗೋಲ್ಡಿ ಬ್ರಾರ್ ಈ ರೀತಿ ಹೇಳಿಕೆ ನೀಡಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ. ಬಹಿರಂಗವಾಗಿ ಈ ರೀತಿ ಹೇಳಿಕೆ ನೀಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹವೂ ಹೆಚ್ಚಾಗಿದೆ.
ಈಗಾಗಲೇ ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಅವರ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಗೆ ಮುಂಬೈ ಪೊಲೀಸರು ಟೈಟ್ ಸೆಕ್ಯೂರಿಟಿ ನೀಡಿದ್ದಾರೆ. ಯಾವುದೇ ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾಗದಂತೆ ತಿಳಿಸಿದ್ದಾರೆ. ಸಲ್ಮಾನ್ ಖಾನ್ ಅವರನ್ನು ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಕೊಲ್ಲುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಪೊಲೀಸರು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದ್ದಾರೆ./////