ಮೃತಪಟ್ಟ KSRTC ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಚೆಕ್ ವಿತರಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಅಪಘಾತದಲ್ಲಿ ಮೃತಪಟ್ಟ ಸಾರಿಗೆ ಸಿಬ್ಬಂದಿಗಳಿಗೆ 1 ಕೋಟಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿತ್ತು. ಅದರಂತೆ ಇದೀಗ ನುಡಿದಂತೆ ನಡೆದ ರಾಜ್ಯ ಸರ್ಕಾರ, ಅಪಘಾತದಲ್ಲಿ ಮೃತ ಚಾಲನಾ ಸಿಬ್ಬಂದಿಗೆ 1 ಕೋಟಿ ಪರಿಹಾರದ ಚೆಕ್ ವಿತರಣೆ ಮಾಡಿದೆ..
ಇಂದು ಸಾರಿಗೆ ಹಾಗೂ ಮುಜರಾಯಿ ಸಚಿವರು ಮತ್ತು KSRTC ಅಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರು, ನಿಗಮದ ಕೇಂದ್ರ ಕಛೇರಿಯಲ್ಲಿ ಅಪಘಾತದಲ್ಲಿ ಮೃತಪಟ್ಟ ಚಾಲನಾ ಸಿಬ್ಬಂದಿಗಳ ಅವಲಂಭಿತರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಯೋಜನೆಯಡಿ ರೂ.1 ಕೋಟಿ ಅಪಘಾತ ಪರಿಹಾರ ವಿಮೆಯ ಚೆಕ್ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.,.
ಕೆ.ಎಸ್.ಆರ್.ಟಿ.ಸಿ ಯು ದೇಶದಲ್ಲಿಯೇ ಪ್ರಪ್ರಥಮವಾಗಿ ಕಾರ್ಮಿಕ ಕಲ್ಯಾಣದ ವಿನೂತನ ಯೋಜನೆ ಅಡಿಯಲ್ಲಿ ತನ್ನ ಸಿಬ್ಬಂದಿಗಳಿಗೆ 1 ರೂ. ಕೋಟಿ ಮೊತ್ತದ ಅಪಘಾತ ವಿಮೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಲ್ಲಿ, ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ವತಿಯಿಂದ ಪ್ರೀಮಿಯಂ ರಹಿತ 50 ರೂ. ಲಕ್ಷಗಳ ವಿಮೆ ಹಾಗೂ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ರವರಿಂದ ವಾರ್ಷಿಕ ರೂ.885/- ಪ್ರೀಮಿಯಂ (ನೌಕರರಿಂದ) ಪಾವತಿಯ ಮೇರೆಗೆ ರೂ.50 ಲಕ್ಷಗಳ ವಿಮೆಯು ಒಳಗೊಂಡಿರುತ್ತದೆ. ಈ ಯೋಜನೆಯಡಿಯಲ್ಲಿ ಸಿಬ್ಬಂದಿಗಳು ಕರ್ತವ್ಯದ ಮೇಲಿದ್ದಾಗ ಹಾಗೂ ಕರ್ತವ್ಯದಲ್ಲಿ ಇಲ್ಲದ ಸಂದರ್ಭಗಳಲ್ಲಿಯೂ ಉಂಟಾಗುವ ಅಪಘಾತಗಳಿಗೂ ಸಹ ಈ ವಿಮಾ ಸೌಲಭ್ಯ ಅನ್ವಯಿಸುತ್ತದೆ..
1. ಈ ಯೋಜನೆಯ ಜಾರಿಯ ನಂತರದಲ್ಲಿ ಕೆ.ಎಸ್.ಆರ್.ಟಿ.ಸಿ. ಯ ಚಾಲನಾ ಸಿಬ್ಬಂದಿಗಳಾದ ಜಿ.ವಿ.ಚಲಪತಿ, 41 ವರ್ಷ, ಚಾಲಕ-ಕಂ-ನಿರ್ವಾಹಕರು, ಬಿಲ್ಲೆ ಸಂಖ್ಯೆ 7275, ಘಟಕ-6, ಬೆಂಗಳೂರು ಕೇಂದ್ರೀಯ ವಿಭಾಗರವರು ನಿಗಮದಲ್ಲಿ 11 ವರ್ಷಗಳ ಸೇವೆ ಸಲ್ಲಿಸಿರುತ್ತಾರೆ. ದಿನಾಂಕ 29/01/2023 ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಫಘಾತ ಸಂಭವಿಸಿ ಮೃತಪಟ್ಟಿರುತ್ತಾರೆ. ಇವರು ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿರುತ್ತಾರೆ. ವಿಮಾ ಪರಿಹಾರ ರೂ.1 ಕೋಟಿ ಹೊರತುಪಡಿಸಿ, ನಿಗಮದ ವತಿಯಿಂದ ರೂ.17.21 ಲಕ್ಷ ಪರಿಹಾರಕ್ಕೆ ಅರ್ಹರಿದ್ದು, ಈ ಪೈಕಿ ರೂ.12.71 ಲಕ್ಷ ಪರಿಹಾರ ಈಗಾಗಲೇ ವಿತರಿಸಲಾಗಿದೆ. ಬಾಕಿ ಮೊತ್ತ ರೂ. 4.50 ಲಕ್ಷವನ್ನು ಮೃತ ಅವಲಂಬಿತರು ಸೂಕ್ತ ದಾಖಲಾತಿ ಸಲ್ಲಿಸಿದೊಡನೆ ಭವಿಷ್ಯ ನಿಧಿ ಇಲಾಖೆಯಿಂದ ಶೀಘ್ರದಲ್ಲಿ ಪಾವತಿಯಾಗಲಿದೆ..
2. ಪಿ.ಎನ್. ನಾಗರಾಜು, 52 ವರ್ಷ, ಚಾಲಕ-ಕಂ-ನಿರ್ವಾಹಕರು, ಬಿಲ್ಲೆ ಸಂಖ್ಯೆ. 1173, ಘಟಕ-2, ಹಾಸನ ವಿಭಾಗ ರವರು ನಿಗಮದಲ್ಲಿ 17 ವರ್ಷಗಳ ಸೇವೆ ಸಲ್ಲಿಸಿರುತ್ತಾರೆ..
ದಿನಾಂಕ 01/02/2023 ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿಮಾಡಿದ ಪರಿಣಾಮ ಅಪಘಾತದಲ್ಲಿ ಮರಣ ಹೊಂದಿರುತ್ತಾರೆ. ಇವರು ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿರುತ್ತಾರೆ. ವಿಮಾ ಪರಿಹಾರ ರೂ.1 ಕೋಟಿ ಹೊರತುಪಡಿಸಿ, ನಿಗಮದ ವತಿಯಿಂದ ರೂ.21.94 ಲಕ್ಷ ಪರಿಹಾರಕ್ಕೆ ಅರ್ಹರಿದ್ದು, ಈ ಪೈಕಿ ರೂ.16.19 ಲಕ್ಷ ಪರಿಹಾರ ಈಗಾಗಲೇ ವಿತರಿಸಲಾಗಿದೆ. ಬಾಕಿ ಮೊತ್ತ ರೂ. 5.75 ಲಕ್ಷ ಮೃತರ ಅವಲಂಬಿತರು ಸೂಕ್ತ ದಾಖಲಾತಿ ಸಲ್ಲಿಸಿದೊಡನೆ ಭವಿಷ್ಯ ನಿಧಿ ಇಲಾಖೆಯಿಂದ ಶೀಘ್ರದಲ್ಲಿಯೇ ಪಾವತಿಯಾಗಲಿದೆ..
ಸಾರಿಗೆ ಹಾಗೂ ಮುಜರಾಯಿ ಸಚಿವರು ಮತ್ತು ಅಧ್ಯಕ್ಷರು, ಕರಾರಸಾ ನಿಗಮ ರವರು ಈ ಎರಡು ಚಾಲನಾ ಸಿಬ್ಬಂದಿಗಳ ಕುಟುಂಬ ವರ್ಗದವರಿಗೆ ಅಪಘಾತ ಪರಿಹಾರ ವಿಮಾದ ತಲಾ ರೂ.1 ಕೋಟಿಗಳ ಚೆಕ್ ವಿತರಿಸಿ ಸಾಂತ್ವನ ಹೇಳಿದರು..
ಈ ವೇಳೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಮೃತಪಟ್ಟ ಚಾಲನಾ ಸಿಬ್ಬಂದಿಗಳನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ, ಅವರ ಕುಟುಂಬಗಳ ಸುಭದ್ರತೆಗಾಗಿ ನಿಗಮವು ಜಾರಿಗೊಳಿಸಿರುವ ಈ ಅಪಘಾತ ಪರಿಹಾರ ವಿಮಾ ಯೋಜನೆಯು ಬಹಳ ಉತ್ತಮವಾಗಿದ್ದು, ..
ಈ ಯೋಜನೆಯನ್ನು ಸಧ್ಯದಲ್ಲಿಯೇ ಇತರೆ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಜಾರಿಗೊಳಿಸಲು ಕೂಡಲೇ ಕ್ರಮ ಜರುಗಿಸಲು ಸೂಚಿಸುವುದಾಗಿ ತಿಳಿಸಿದರು. ಕುಟುಂಬದವರು ಹಣವನ್ನು ಬ್ಯಾಂಕಿನಲ್ಲಿ ಸ್ಥಿರ ಠೇವಣಿಯನ್ನು ಇಟ್ಟು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಾಗೂ ತಮ್ಮ ಮುಂದಿನ ಜೀವನಕ್ಕಾಗಿ ಕಾಪಾಡಿಕೊಳ್ಳಬೇಕು. ಅನುಕಂಪ ಆಧಾರದ ಮೇಲಿನ ಕೆಲಸಕ್ಕೆ ಅರ್ಜಿ ಸಲ್ಲಿಸಲು ತಿಳಿಸಿದರು. ನಿಗಮದ ಸಿಬ್ಬಂದಿಗಳ ಹಾಗೂ ಕುಟುಂಬದವರ ಹಿತಾಸಕ್ತಿ ಕಾಪಾಡಲು ನಾವು ನಿಮ್ಮೊಡನೆ ಸದಾ ಇರುವುದಾಗಿ ತಿಳಿಸಿದರು..