ಭ್ರಷ್ಟಾಚಾರ ವಿಷಯದಲ್ಲಿ ನಾವು ಶೂನ್ಯ ಸಹಿಷ್ಣು ಆಗಿರುತ್ತೇವೆ ಎಂದ ರಾಹುಲ್ ಗಾಂಧಿ

ನವದೆಹಲಿ: ‘ಕರ್ನಾಟಕದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಶೇ 40 ಲಂಚದ ಆರೋಪದ ಬಗ್ಗೆ ಕಾಂಗ್ರೆಸ್ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಿ ಯಶಸ್ಸು ಗಳಿಸಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಈ ವಿಷಯದಲ್ಲಿ ನಾವು ಶೂನ್ಯ ಸಹಿಷ್ಣು ಆಗಿರುತ್ತೇವೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಜ್ಯದ ಸಚಿವರಿಗೆ ಎಚ್ಚರಿಕೆ ನೀಡಿದರು. .
ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಂಬಂಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ
ಖರ್ಗೆ ನೇತೃತ್ವದಲ್ಲಿ ಎಐಸಿಸಿ ಕಚೇರಿಯಲ್ಲಿ ಬುಧವಾರ ನಡೆದ ರಾಜ್ಯ ಕಾಂಗ್ರೆಸ್ನ ಹಿರಿಯ ನಾಯಕರ ಸಭೆಯಲ್ಲಿ ಮಾತನಾಡಿದ ರಾಹುಲ್, ‘ನಾವು ಸ್ವಚ್ಛ ಆಡಳಿತ ನೀಡಬೇಕು. ಕೆಲವು ಸಚಿವರು ತಮ್ಮ ಧೋರಣೆಯನ್ನು ಬದಲಿಸಿಕೊಳ್ಳಬೇಕು. ಸ್ವಜನ ಪಕ್ಷಪಾತಕ್ಕೆ ಅವಕಾಶ ನೀಡಬಾರದು’ ಎಂದು ತಾಕೀತು ಮಾಡಿದರು..
‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಎರಡು ತಿಂಗಳಷ್ಟೇ ಕಳೆದಿದೆ. ಅಷ್ಟರಲ್ಲೇ ಕೆಲವು ಸಚಿವರ ಕಾರ್ಯವೈಖರಿ ಬಗ್ಗೆ ಪಕ್ಷದ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಲವು ಸಚಿವರು ಶಾಸಕರ ಕೈಗೂ ಸಿಗುತ್ತಿಲ್ಲ’ ಎಂದು ಕೆಲವು ಮುಖಂಡರು ಸಭೆಯಲ್ಲಿ ಪ್ರಸ್ತಾಪಿಸಿದರು..
ಈ ವೇಳೆ ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಇವೆಲ್ಲ ಆಧಾರರಹಿತ ಆರೋಪಗಳು. ಶಾಸಕಾಂಗ ಪಕ್ಷದ ಸಭೆ ಕರೆದು ಶಾಸಕರ ಅಹವಾಲು ಆಲಿಸಲಾಗಿದೆ’ ಎಂದು ಸ್ಪಷ್ಟಪಡಿಸಿದರು. ‘ನಮ್ಮ ಸರ್ಕಾರದ ಬಗ್ಗೆ ಸಣ್ಣ ಕಳಂಕವೂ ಇರಬಾರದು. ಯಾರೂ ಇಂತಹ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು’ ಎಂದು ರಾಹುಲ್ ಸೂಚಿಸಿದರು ಎಂದು ಮೂಲಗಳು ಹೇಳಿವೆ.
ಹಿರಿಯ ನಾಯಕರ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ‘ನಮ್ಮ ಸರ್ಕಾರದ ಬಗ್ಗೆ ಜನರು ಸಾಕಷ್ಟು ನಿರೀಕ್ಷೆಗಳನ್ನು ಇರಿಸಿಕೊಂಡಿದ್ದಾರೆ. ನಾವು ಮೊದಲಿನಿಂದಲೂ ಬಡ ಜನರಿಗಾಗಿ ಕಾರ್ಯಕ್ರಮಗಳನ್ನು ನೀಡಿದವರು. ಈ ಸಲದ ಚುನಾವಣೆಯಲ್ಲಿ ದಲಿತರು, ಹಿಂದುಳಿದವರು ಹಾಗೂ ಮುಸ್ಲಿಮರ ಜತೆಗೆ ಮಹಿಳೆಯರೂ ನಮ್ಮ ಕೈ ಹಿಡಿದಿದ್ದಾರೆ. ಅವರ ವಿಶ್ವಾಸಕ್ಕೆ ಭಂಗ ಬಾರದಂತೆ ನೋಡಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು..
‘ಸರ್ಕಾರ ರಚನೆಯಾಗಿ ಎರಡು ತಿಂಗಳಲ್ಲೇ ಗ್ಯಾರಂಟಿ ಯೋಜನೆಗಳು ಜಾರಿ ಆಗಿದೆ. ಈ ಯೋಜನೆಗಳ ಲಾಭ ಕರ್ನಾಟಕದ ಮಧ್ಯಮ ವರ್ಗ ಮತ್ತು ಬಡವರಿಗೆ ತಲುಪುತ್ತಿದೆ. ಈ ಗ್ಯಾರಂಟಿಗಳು ಪ್ರತಿಯೊಬ್ಬ ಫಲಾನುಭವಿಗೂ ಕಡ್ಡಾಯವಾಗಿ ತಲುಪುವಂತೆ ಸರ್ಕಾರಿ ಯಂತ್ರಾಂಗಗಳನ್ನು ಪರಿಣಾಮಕಾರಿಯಾಗಿ ಬಳಸಬೇಕು’ ಎಂದು ಸೂಚಿಸಿದರು. .
’ಕೋಮುವಾದ, ರಾಷ್ಟ್ರೀಯತೆ ಹಾಗೂ ಪ್ರಧಾನಿ ನರೇಂದ್ರ ಮೋದಿ ವರ್ಚಸ್ಸನ್ನು ಬಳಸಿಕೊಂಡು
ಚುನಾವಣೆಗಳಲ್ಲಿ ಗೆಲ್ಲಬಹುದು ಎಂದು ಬಿಜೆಪಿ ಭಾವಿಸಿದೆ. ರಾಜ್ಯದಲ್ಲಿ ಬಡಜನರ ಪರವಾಗಿ ಹೋರಾಟ ಮಾಡಿ ಹಾಗೂ ಯೋಜನೆಗಳನ್ನು ಅದಕ್ಕೆ ತಕ್ಕ ತಿರುಗೇಟನ್ನು ನೀಡಿದ್ದೇವೆ. ಈ ಗ್ಯಾರಂಟಿ ಯೋಜನೆಗಳ ಯಶಸ್ಸು ಲೋಕಸಭಾ ಚುನಾವಣೆಗೆ ಭದ್ರ ಬುನಾದಿ ಆಗಬೇಕು ಎಂದೂ ರಾಹುಲ್ ಹೇಳಿದರು. ರಾಜ್ಯದಲ್ಲಿ 20ರಿಂದ 22 ಕ್ಷೇತ್ರಗಳಲ್ಲಿ ಗೆಲ್ಲಲು ಅವಕಾಶಗಳಿವೆ..
ವಿಧಾನಸಭಾ ಚುನಾವಣಾ ಮಾದರಿಯಲ್ಲೇ ಒಗ್ಗಟ್ಟಿನಿಂದ ಮುಂದುವರಿದರೆ ಈ ಗುರಿ ಅಸಾಧ್ಯವಲ್ಲ’ ಎಂದೂ ಅವರು ಹೇಳಿದರು. ‘ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 15ರಿಂದ 20 ಸ್ಥಾನಗಳನ್ನು ಗೆದ್ದು ತೋರಿಸುತ್ತೇವೆ’ ಎಂದು ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು ಎಂದು ಮೂಲಗಳು ಹೇಳಿವೆ.