Belagavi News In Kannada | News Belgaum

ನಾವು ಆಪರೇಷನ್ ಹಸ್ತ ಮಾಡುತ್ತಿಲ್ಲ, ಅವರಾಗಿಯೇ ಬಂದರೆ ಸ್ವಾಗತಿಸುತ್ತೇವೆ: ಡಿಸಿಎಂ ಡಿ.ಕೆ.ಶಿ

ಮೈಸೂರು: “ನಾವು ಆಪರೇಷನ್ ಹಸ್ತ ಮಾಡುತ್ತಿಲ್ಲ. ನಮ್ಮ ಪಕ್ಷದ ವರ್ಚಸ್ಸು ಮತ್ತು ಸಿದ್ಧಾಂತವನ್ನು ಒಪ್ಪಿ ಬಿಜೆಪಿ, ಜೆಡಿಎಸ್ ನಾಯಕರುಗಳು ಅವರಾಗಿಯೇ ಬರುತ್ತೇವೆ ಎನ್ನುತ್ತಿದ್ದಾರೆ. ಹಾಗೆ ಬರುವವರಿಗೆ ನಮ್ಮ ಸ್ವಾಗತ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಗೃಹ ಲಕ್ಷ್ಮಿ ಯೋಜನೆ ಉದ್ಘಾಟನಾ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲು ಇಂದು ಆಗಮಿಸಿದ ಡಿ.ಕೆ.ಶಿವಕುಮಾರ್​, ಮೈಸೂರಿನ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದರು.
“ನಾವಾಗಿಯೇ ಯಾರನ್ನೂ ಕರೆತರುವ ಪ್ರಯತ್ನ ಮಾಡುತ್ತಿಲ್ಲ. ಅವರ ಭವಿಷ್ಯದ ದೃಷ್ಟಿಯಿಂದ ನಮ್ಮ ಪಕ್ಷದ ವರ್ಚಸ್ಸನ್ನು ಅವರೇ ನಿರ್ಧರಿಸುತ್ತಿದ್ದಾರೆ. ಎಷ್ಟು ಜನ ಬರುತ್ತಾರೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಎಲ್ಲದಕ್ಕೂ ಸಮಯ, ಕಾಲ, ಘಳಿಗೆ ಎಂಬುದಿದೆ. ಆ ಘಳಿಗೆ ಬಂದಾಗ ಎಲ್ಲವೂ ನಡೆಯುತ್ತದೆ” ಎಂದು ಸೂಚ್ಯವಾಗಿ ತಿಳಿಸಿದರು.
ಜೆಡಿಎಸ್ ಶಾಸಕರನ್ನು ಕಾಂಗ್ರೆಸ್​ಗೆ ಸೆಳೆಯುವ ಪ್ರಯತ್ನ ನಡೆಯುತ್ತಿದೆ ಎಂಬ ವಿಚಾರಕ್ಕೆ, “ಇಂತಹ ಮಾತುಗಳನ್ನು ನಾನು ಹೇಳುತ್ತಾ ಹೋದರೆ ಅದು ಬಹಳ ದೊಡ್ಡದಾಗುತ್ತದೆ. ಈಗ ಅದರ ಬಗ್ಗೆ ಚರ್ಚೆ ಬೇಡ” ಎಂದರು.
ಗೃಹ ಲಕ್ಷ್ಮಿ ಯೋಜನೆ ಕಾರ್ಯಕ್ರಮ ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್ ಆಗಿರುವ ವಿಚಾರಕ್ಕೆ, “ಯೋಜನೆ ಮೈಸೂರಿಗೆ ಶಿಫ್ಟ್ ಆಗಿರುವುದರ ಹಿಂದೆ ಯಾವುದೇ ರಾಜಕೀಯ ಇಲ್ಲ. ಬೆಳಗಾವಿಯಲ್ಲಿ ಇನ್ನೊಂದು ಕಾರ್ಯಕ್ರಮ ಮಾಡಲು ಪ್ಲಾನ್ ಮಾಡಿದ್ದೇವೆ. ಇದು ಒಮ್ಮತದ ತೀರ್ಮಾನ” ಎಂದು ತಿಳಿಸಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ, ಬೆಳಗಾವಿಯಲ್ಲಿ 2 ಲೋಕಸಭಾ ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ. ಮೈಸೂರಿನಲ್ಲಿ ಅನ್ನಭಾಗ್ಯ ಯೋಜನೆ ಕಾರ್ಯಕ್ರಮ ನಡೆಸಬೇಕೆತ್ತು. ಆದರೆ ಅದಕ್ಕೆ ಸ್ವಲ್ಪ ಅಡೆತಡೆಗಳು ಎದುರಾಗಿದ್ದು ಗೃಹ ಲಕ್ಷ್ಮಿ ಯೋಜನೆಯನ್ನು ಇಲ್ಲಿಂದಲೇ ಪ್ರಾರಂಭಿಸುತ್ತಿದ್ದೇವೆ. ಬೆಂಗಳೂರಿನಲ್ಲೂ ಕಾರ್ಯಕ್ರಮ ಮಾಡಲು ಯೋಜನೆ ಮಾಡಿದ್ದೆವು. ಟ್ರಾಫಿಕ್ ಸಮಸ್ಯೆ ಉಂಟಾಗುವುದರಿಂದ ಮೈಸೂರಿಗೆ ಶಿಫ್ಟ್ ಮಾಡಿದ್ದೇವೆ” ಎಂದು ಮಾಹಿತಿ ನೀಡಿದರು.
“30ನೇ ತಾರೀಖಿನಂದು ನಡೆಯುವ ಗೃಹ ಲಕ್ಷ್ಮಿ ಯೋಜನೆ ಕಾರ್ಯಕ್ರಮದ ಮೂಲಕ ಎಲ್ಲಾ ಫಲಾನುಭವಿಗಳ ಖಾತೆಗೂ ಬಟನ್ ಒತ್ತಿದ ಕೂಡಲೇ ಅವರವರ ಖಾತೆಗೆ ಹಣ ಸಂದಾಯವಾಗಲಿದೆ. ಅದರ ಮೆಸೇಜ್ ಫೋನ್​ಗಳಿಗೆ ಹೋಗಲಿದೆ. ಹಣದ ವ್ಯವಸ್ಥೆಯನ್ನು ಬ್ಯಾಂಕ್​ಗಳಿಗೆ ಮಾಡಿದ್ದೇವೆ. ನಮಗೆ ಯಾವುದೇ ಹಣದ ಕೊರತೆ ಇಲ್ಲ. ಸರ್ವರ್ ಸಮಸ್ಯೆಯಾದರೆ ಮಾತ್ರ ಒಂದಿಷ್ಟು ಜನರಿಗೆ ಹಣ ಬರುವುದು ತಡವಾಗಬಹುದು” ಎಂದು ಡಿಕೆಶಿ ಹೇಳಿದರು.

ಪ್ರಧಾನ ಮಂತ್ರಿ ಮೋದಿಯವರು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿರುವ ವಿಚಾರಕ್ಕೆ, ಈಗ ಅವರದೇ ಸರ್ಕಾರ ಇರುವ ಮಧ್ಯಪ್ರದೇಶದಲ್ಲಿ, ನಾವು ತಂದ ಗ್ಯಾರಂಟಿ ಯೋಜನೆಗಳನ್ನು ನೋಡಿ ಅವರೂ ಸಹ ಗ್ಯಾರಂಟಿ ಸ್ಕೀಮ್​ಗಳನ್ನು ಜಾರಿ ಮಾಡಿದ್ದಾರೆ. ಇದಕ್ಕೆ ಪ್ರಧಾನಿ ಮಂತ್ರಿಯವರು ಏನು ಹೇಳುತ್ತಾರೆ?. ದೇಶದ ಎಲ್ಲೆಡೆಗಳಲ್ಲೂ ನಮ್ಮ ಗ್ಯಾರಂಟಿ ಯೋಜನೆಗಳು ಸದ್ದು ಮಾಡುತ್ತಿವೆ” ಎಂದರು.////