Belagavi News In Kannada | News Belgaum

ʻಗೃಹಲಕ್ಷ್ಮಿʼ ಯೋಜನೆಗೆ ಅದ್ಧೂರಿ ಚಾಲನೆ

ಮೈಸೂರು: ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ನಾಲ್ಕನೇ ಗ್ಯಾರಂಟಿ ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹ ಲಕ್ಷ್ಮೀ ಯೋಜನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬುಧವಾರ (ಇಂದು) ಚಾಲನೆ ನೀಡಿದರು.
ಡಿಜಿಟಲ್ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು. ಇದೇ ವೇಳೆ ರಾಹುಲ್ ಗಾಂಧಿಯವರು ಕಾಂಗ್ರೆಸ್​ನ 100 ದಿನಗಳ ಯಶಸ್ವಿ ಪುಸ್ತಕ ಬಿಡುಗಡೆ ಮಾಡಿದರು.
ಯೋಜನೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ರಾಹುಲ್ ಗಾಂಧಿ ಅವರು, ಚುನಾವಣೆಯ ಮುಂಚೆ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಘೋಷಿಸಿತ್ತು. ಕಾಂಗ್ರೆಸ್ ಪಕ್ಷ ಕೊಟ್ಟ ಮಾತನ್ನು ಈಡೇರಿಸಿದೆ. ಇವತ್ತು ನಾವು ಈ ಕಾರ್ಯಕ್ರಮದಲ್ಲಿ ಡಿಜಿಟಲ್ ಬಟನ್ ಒತ್ತುವ ಮೂಲಕ ಮನೆಯ ಯಜಮಾನಿಯ ಖಾತೆಗೆ ಹಣ ಸಂದಾನ ಆಗಿದೆ ಎಂದು ಹೇಳಿದರು.
ಪ್ರತಿ ತಿಂಗಳು 2 ಸಾವಿರ ಹಣ ಜಮೆ ಆಗಲಿದೆ. ಇದು ನಮ್ಮ ಹಾಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಭರವಸೆ. ನಾವು ಹೇಳಿದಂತೆ ರಾಜ್ಯದ ಹೆಣ್ಣು ಮಕ್ಕಳು ಉಚಿತವಾಗಿ ಶಕ್ತಿ ಯೋಜನೆ ಜಾರಿಯಾಗಿದೆ. ಮಹಿಳೆಯರೀಗ ಉಚಿತವಾಗಿ ಸಂಚರಿಸುತ್ತಿದ್ದಾರೆ. ಅನ್ನ ಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡಲಾಗುತ್ತಿದೆ. ಗ್ರಹ ಜ್ಯೋತಿಯಡಿ 200 ಯುನಿಟ್ ವಿದ್ಯುತ್ ನೀಡಲಾಗುತ್ತಿದೆ. ನಮ್ಮ ಐದು ಗ್ಯಾರಂಟಿಗಳ ಪೈಕಿ 4 ಗ್ಯಾರಂಟಿಗಳು ಮಹಿಳೆಯರಿಗಾಗಿ ಮಾಡಿರುವ ಯೋಜನೆಗಳು ಎಂದು ತಿಳಿಸಿದರು.


ಕರ್ನಾಟಕ ಇಡೀ ದೇಶಕ್ಕೆ ದಿಕ್ಸೂಚಿಯಾಗಿದೆ. ನಮ್ಮ ಗ್ಯಾರಂಟಿ ಘೋಷಣೆ ವೇಳೆ ಕೇಂದ್ರ ಸರ್ಕಾರ ಟೀಕೆ ಮಾಡಿತ್ತು. ಆದರೆ, ನಾವಿಂದು ನುಡಿದಂತೆ ನಡೆದಿದ್ದೇವೆ. ಕರ್ನಾಟಕರ ನಮ್ಮ ತಾಯಂದಿರು, ಅಕ್ಕ-ತಂಗಿಯರು ಉಚಿತವಾಗಿ ಕರ್ನಾಟಕ ಸುತ್ತಾಡುತ್ತಿದ್ದಾರೆ. ಉಚಿತ ವಿದ್ಯುತ್ ನೀಡಲಾಗಿದೆ, ಇಂದು ಒಂದು ಕೋಟಿಗೂ ಹೆಚ್ಚು ಮಹಿಳೆಯರ ಖಾತೆಯಲ್ಲಿ ಎರಡು ಸಾವಿರ ಹಣ ಇದೆ. ಭಾರತ ದೇಶದ ಅತಿ ದೊಡ್ಡ ಹಣ ವರ್ಗಾವಣೆಯನ್ನು ನಮ್ಮ ಸರ್ಕಾರ ಮಾಡಿದೆ. 2 ಸಾವಿರ ಖಾತೆಗೆ ಹಣ ಹಾಗುವ ಯೋಜನೆ ಚಿಕ್ಕ ಯೋಜನೆ ಅಲ್ಲ. ಇದರಿಂದ ಮಹಿಳೆಯರು ಹಣ ಉಳಿತಾಯ ಮಾಡಬಹುದು, ಮಕ್ಕಳಿಗೆ ಪುಸ್ತಕ ಕೊಡಿಸಬಹುದು. ಇದರ ಸಂಪೂರ್ಣ ಉಪಯೋಗ ಮಹಿಳೆಯರ ಮೇಲಿದೆ.
ನಾವು ಮಾಡಲಾಗುವುದನ್ನು ಮಾತ್ರ ಹೇಳುತ್ತೇವೆ. ಈಡೇರಿಸಲಾಗದ ಮಾತುಗಳನ್ನು ಹೇಳುವುದಿಲ್ಲ. ಕಾಂಗ್ರೆಸ್ ಯೋಜನೆಗಳು ಮಹಿಳೆಯರ ಪರವಾದ ಯೋಜನೆಗಳಾಗಿವೆ. ಭಾರತ್ ಜೋಡೋ ಯಾತ್ರೆ ವೇಳೆ ಆಲಿಸಿದ ಮಹಿಳೆಯರ ಸಮಸ್ಯೆಯನ್ನೇ ನಾವೀಗ ಈಡೇರಿಸಿದ್ದೇವೆ ಎಂದು ಹೇಳಿದರು. ಇದೇ ವೇಳೆ ಮಹಿಳೆಯರಿಗೆ ರಕ್ಷಾ ಬಂಧನದ ಶುಭಾಶಯ ತಿಳಿಸಿದರು.


ಬಳಿಕ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ಕಾಂಗ್ರೆಸ್ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ಕೊಟ್ಟ ಭರವಸೆಗಳನ್ನು ಈಡೇರಿಸುತ್ತಿದೆ. ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ರಾಹುಲ್ ಗಾಂಧಿ ಹೇಳಿದ್ದನ್ನೇ ನಾನು ಹೇಳುತ್ತಿದ್ದೇನೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ 5 ಗ್ಯಾರಂಟಿಗಳನ್ನು ಘೋಷಿಸಿದ್ದು ಈಗಾಗಲೇ 4 ಗ್ಯಾರಂಟಿ ಘೋಷಣೆಯಾಗಿದೆ. ಒಂದು ಮಾತ್ರ ಬಾಕಿ ಇದೆ. ಯಾವ ಸರ್ಕಾರವೂ ಈ ರೀತಿಯ ಯೋಜನೆಗಳನ್ನು ಮಾಡಿಲ್ಲ. ಇಡೀ ಭಾರತದಲ್ಲಿ ಒಪ್ಪುವಂತಹ ಗ್ಯಾರಂಟಿಗಳಿವು. ಚುನಾವಣೆ ಮುಂಚೆ ನಾವು ಗ್ಯಾರಂಟಿ ಘೋಷಣೆ ಮಾಡಿದಾಗ, ಕೇಂದ್ರ ನಾಯಕರು ಟೀಕೆ ಮಾಡಿದ್ದರು. ಇದರಿಂದ ಆರ್ಥಿಕತೆ ಕುಸಿಯುತ್ತದೆ. ಇದು ಸುಳ್ಳು ಭರವಸೆ ಎಂದು ಹೇಳಿದ್ದರು. ಆದರೆ, ನಾವು ನುಡಿದಂತೆ ನಡೆದಿದ್ದೇವೆ. ಭರವಸೆಯನ್ನು ಈಡೇರಿಸಿದ್ದೇವೆ ಎಂದರು.


ಇದೇ ವೇಳೆ ಕೇಂದ್ರದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಅವರು, 50 ವರ್ಷದಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಾರೆ. ಆದರೆ, ನಾವು ವಿಮಾನ ನಿಲ್ದಾಣ, ಅನೇಕ ಸಂಸ್ಥೆಗಳನ್ನು ಮಾಡಿದ್ದೇವೆ. ನಾವು ಮಾಡಿದ ಕೆಲಸಗಳಲ್ಲಿ ಹುಡುಕಾಡಿ ಸುಟ್ಟ ಬಣ್ಣ ಬಳಿದು ತಮ್ಮದೆನ್ನುತ್ತಾರೆ. ನಮ್ಮ ಬಳಿ ಕಾಂಗ್ರೆಸ್ ಸರ್ಕಾರ ಏನು ಮಾಡಿದೆ ಎಂಬ ರಿಪೋರ್ಟ್ ಕಾರ್ಡ್ ಇದೆ. ನೆಹರು, ಇಂದಿರಾ ಗಾಂದಿ, ಸೋನಿಯಾ ಗಾಂದಿ ಮಾಡಿದ ಎಲ್ಲಾ ಕಾರ್ಯಗಳ ರಿಪೋರ್ಟ್ ನಮ್ಮ ಬಳಿ ಇದೆ. ಶೇ.14-ಶೇ. 74 ಜನರಿಗೆ ನಮ್ಮ ಸರ್ಕಾರದ ಸಮಯದಲ್ಲಿ ಶಿಕ್ಷಿತರನ್ನಾಗಿ ಮಾಡಲಾಗಿದೆ ಎಂದು ಹೇಳಿದರು.
ಎಸ್​ಟಿ, ಎಸ್​ಗಳ ಶಿಕ್ಷಣ ಕೇವಲ ಶೇ.7 ಇತ್ತು. ನಾವು ಶೇ.60 ಮಾಡಿದ್ದೇವೆ. ಕಾಂಗ್ರೆಸ್ 50 ವರ್ಷದಲ್ಲಿ ಏನು ಮಾಡಿಲ್ಲ ಎಂದು ಹೇಳುತ್ತಾರೆ. ನಾವು ಮಾಡಿದ್ದು ಬಹಳ ಇದೆ. 1947ರ ಹಿಂದೆ 2 ಲಕ್ಷ ಪ್ರಾರ್ಥಮಿಕ ಶಾಲೆಗಳಿದ್ದವು. ಈಗ 8 ಲಕ್ಷ ಇದೆ. ನರೇಗಾ ನಾವು ತಂದಿದ್ದು, ಸೋನಿಯಾ ಗಾಂಧಿಯವರು ಫುಡ್ ಸೆಕ್ಯೂರಿಟಿ ಆ್ಯಕ್ಟ್ ತಂದರು, ಅದಕ್ಕೆ ಉಚಿತ ಅನ್ನ ಭಾಗ್ಯವೂ ನಾವು ತಂದದ್ದು. ಬಡವರಿಗಾಗಿ ನಾವು ಯೋಜನೆಗಳನ್ನು ಮಾಡಿದ್ದೇವೆ. ಆದರೆ, ಅವರು ಶ್ರೀಮಂತರಿಗಾಗಿ ಇದ್ದಾರೆ. ಇಲ್ಲಿ ಮೋದಿ ಎಂದು ಹೇಳಿದರೆ ಕೇಸ್ ಹಾಕುತ್ತಾರೆ. ಮೋದಿ ಎಂದಿದಕ್ಕೆ ರಾಹುಲ್ ಗಾಂಧಿ ಮೇಲೆ ಕೇಸ್ ಹಾಕಿದರು. ಆದರೆ, ರಾಹುಲ್ ಯಾವುದಕ್ಕೂ ಹೆದರುವುದಿಲ್ಲ. ಕನ್ಯಾಕುಮಾರಿಯಿಂದ ಕಾಶ್ಮೀರವರೆಗೆ ಪಾದಯಾತ್ರೆ ಮಾಡಿ, ರಾಹುಲ್ ಗಾಂಧಿ ಜನರ ಮಾತು ಆಲಿಸಿದ್ದಾರೆ. ಕೇಂದ್ರದ ಯಾವ ನಾಯಕ ಈ ರೀತಿ ಮಾಡಿದ್ದಾರೆ ಎಂದು ಪ್ರಶ್ನಿಸಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ವೇದಿಕೆ ಮೇಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಸಚಿವರಾದ ಡಾ.ಜಿ.ಪರಮೇಶ್ವರ್, ಡಾ.ಮಹದೇವಪ್ಪ, ಸತೀಶ್‌ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಕೆ.ವೆಂಕಟೇಶ್, ಕೃಷ್ಣ ಭೈರೇಗೌಡ, ಚಲುವರಾಯಸ್ವಾಮಿ, ಕೆ.ಎನ್.ರಾಜಣ್ಣ ಉಪಸ್ಥಿತರಿದ್ದರು.//////